ಬೆಂಗಳೂರು, ಆ. 3: ಕರ್ನಾಟಕ ಸ್ವಾಭಿಮಾನಿ ಸಂಘಟನೆಗಳ ಒಕ್ಕೂಟದ ವತಿಯಿಂದ ಸರ್ಕಾರಿ ಕನ್ನಡ ಶಾಲೆಗಳನ್ನು ಉಳಿಸಿ ಅಭಿವೃದ್ಧಿಪಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದ್ದು. ಸರ್ಕಾರಿ ಕನ್ನಡ ಶಾಲೆಗಳು ರಾಜ್ಯದ ಭಾಷೆ, ಸಂಸ್ಕೃತಿ ಹಾಗೂ ಶಿಕ್ಷಣದ ಜೀವನಾಡಿಯಾಗಿದ್ದು, ವಿದ್ಯಾರ್ಥಿಗಳ ಸಂಖ್ಯೆ ಕುಸಿತ, ಶಿಕ್ಷಕರ ಕೊರತೆ, ಮೂಲಭೂತ ಸೌಲಭ್ಯಗಳ ಅಭಾವ ಮತ್ತು ಕೆಲವು ಶಾಲೆಗಳ ವಿಲೀನ ಅಥವಾ ಮುಚ್ಚುವಿಕೆಯಂತಹ ಬೆಳವಣಿಗೆಗಳು ಆತಂಕಕ್ಕೆ ಕಾರಣವಾಗಿವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಯಾವುದೇ ಸರ್ಕಾರಿ ಕನ್ನಡ ಶಾಲೆಯನ್ನು ಮುಚ್ಚದಂತೆ ಕ್ರಮವಹಿಸುವುದು, ಖಾಲಿ ಶಿಕ್ಷಕರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡುವುದು, ಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು, ಕನ್ನಡ ಮಾಧ್ಯಮ ಶಿಕ್ಷಣಕ್ಕೆ ವಿಶೇಷ ಪ್ರೋತ್ಸಾಹ ನೀಡುವುದು, ಗುಣಮಟ್ಟದ ಶಿಕ್ಷಣದ ಮೂಲಕ ಸಾರ್ವಜನಿಕರಲ್ಲಿ ವಿಶ್ವಾಸ ಹೆಚ್ಚಿಸುವುದು ಹಾಗೂ ಗ್ರಾಮೀಣ ಮತ್ತು ನಗರ ಪ್ರದೇಶಗಳ ಸರ್ಕಾರಿ ಶಾಲೆಗಳಿಗೆ ಸಮರ್ಪಕ ಅನುದಾನ ಒದಗಿಸುವಂತೆ ಒಕ್ಕೂಟವು ಒತ್ತಾಯಿಸಿದೆ.
“ಕನ್ನಡ ಶಾಲೆಗಳನ್ನು ಉಳಿಸುವುದು ಎಂದರೆ ಕರ್ನಾಟಕದ ಭಾಷೆ, ಸಂಸ್ಕೃತಿ ಹಾಗೂ ಮುಂದಿನ ಪೀಳಿಗೆಯ ಭವಿಷ್ಯವನ್ನು ರಕ್ಷಿಸುವುದಾಗಿದೆ” ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಈ ಸಂದರ್ಭದಲ್ಲಿ ಒಕ್ಕೂಟದ ಮಹಿಳಾ ರಾಜ್ಯಾಧ್ಯಕ್ಷೆ ಸ್ವಪ್ನ ಜಿ, ಪ್ರಧಾನ ಕಾರ್ಯದರ್ಶಿ ಸಾಕೇ ನಾರಾಯಣ, ಉಪಾಧ್ಯಕ್ಷ ನಂಜಪ್ಪ, ಯುವ ಘಟಕದ ಉಪಾಧ್ಯಕ್ಷ ಕನ್ನಡ ಧನುಷ್, ಸಾಮಾಜಿಕ ಹೋರಾಟಗಾರ ರಾಜು, ಸಾಮಾಜಿಕ ಹೋರಾಟಗಾರ್ತಿ ಶ್ರೀಮತಿ ಗೌರಮ್ಮ, ಎಂಆರ್ಪಿಎಸ್ ಪ್ರಸಾದ್, ಪುರುಷೋತ್ತಮ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

