Site icon NBTV Kannada

ಚಳ್ಳಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೊಸ ವಿದ್ಯಾರ್ಥಿಗಳಿಗೆ ಅದ್ಧೂರಿ ಸ್ವಾಗತ

ಚಳ್ಳಕೆರೆ(ಸೆ.13): ನಗರದ ಎಚ್.ಪಿ.ಸಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿಗಳಿಗಾಗಿ ತೃತೀಯ ವರ್ಷದ ಬಿ.ಕಾಂ ವಿದ್ಯಾರ್ಥಿಗಳ ವತಿಯಿಂದ ‘ಹೊಸ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ’ವನ್ನು ಅದ್ಧೂರಿಯಾಗಿ ಆಯೋಜಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಪ್ಪ ಎಂ.ಕೆ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ನೂತನ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು. ವಿದ್ಯಾರ್ಥಿ ಜೀವನವು ಭವಿಷ್ಯ ರೂಪಿಸಿಕೊಳ್ಳುವ ಪ್ರಮುಖ ಹಂತವಾಗಿದ್ದು, ಶಿಸ್ತು, ಸಮಯಪಾಲನೆ, ಉತ್ತಮ ನಡವಳಿಕೆ ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.ಕಾಲೇಜಿನ ಶೈಕ್ಷಣಿಕ ವಾತಾವರಣವನ್ನು ಸದುಪಯೋಗಪಡಿಸಿಕೊಂಡು ನಿರಂತರ ಅಧ್ಯಯನದ ಮೂಲಕ ಉತ್ತಮ ಫಲಿತಾಂಶ ಗಳಿಸಬೇಕು. ಉನ್ನತ ಗುರಿಗಳನ್ನು ಹೊಂದಿ, ಅವುಗಳನ್ನು ಸಾಧಿಸಲು ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಪಠ್ಯದ ಜತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು, ಕೌಶಲ್ಯಾಭಿವೃದ್ಧಿ ಹಾಗೂ ವಿವಿಧ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸರ್ವತೋಮುಖ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದರು.ಮುಖ್ಯ ಅತಿಥಿಯಾಗಿ ಚಿತ್ರದುರ್ಗ ಮಹಿಳಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಚನ್ನಕೇಶವ್ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜು ಜೀವನವನ್ನು ಸದುಪಯೋಗಪಡಿಸಿಕೊಂಡು ಜ್ಞಾನ ಮತ್ತು ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.ತೃತೀಯ ವರ್ಷದ ವಿದ್ಯಾರ್ಥಿಗಳು ನೂತನ ವಿದ್ಯಾರ್ಥಿಗಳನ್ನು ಬರಮಾಡಿಕೊಂಡು ತಮ್ಮ ಕಾಲೇಜು ಅನುಭವಗಳನ್ನು ಹಂಚಿಕೊಂಡರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳು ನಡೆದವು.ಈ ಸಂದರ್ಭದಲ್ಲಿ ಎಚ್.ಒ.ಡಿ. ರಂಗಸ್ವಾಮಿ ಹೆಚ್., ಡಾ. ಕೆ.ಆರ್.ಜೆ. ರಾಜಕುಮಾರ್, ಡಾ. ರಾಘವೇಂದ್ರ, ಡಾ. ಸಂತೋಷ್, ಡಾ. ಶರಣಪ್ಪ, ಡಾ. ಪ್ರಕಾಶ್, ಸುಜಾತ, ವಿಜಯಶ್ರೀ, ಮೀನು ಸೇರಿದಂತೆ ವಿವಿಧ ವಿಭಾಗಗಳ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

Exit mobile version